ನಂದಿನಿ ಮನುಪ್ರಸಾದ್ ನಾಯಕ್
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಇಂದು (ನವೆಂಬರ್ 25) ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ
ಮರಣೋತ್ತರ ಪರೀಕ್ಷೆಗಾಗಿ ಮಹಾಂತೇಶ ಬೀಳಗಿ ಪಾರ್ಥೀವ ಶರೀರವನ್ನು ಮಣ್ಣೂರ ಖಾಸಗಿ ಆಸ್ಪತ್ರೆಯಿಂದ ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ
ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ದೌಡಾಯಿಸಿದ್ದಾರೆ.
1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಇನ್ನು ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.