ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳ ರಚನೆ

ನಂದಿನಿ ಮನುಪ್ರಸಾದ್ ನಾಯಕ್

 

ಮೈಸೂರು ದಸರಾ 2026: 17 ಉಪಸಮಿತಿಗಳ ರಚನೆ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ


ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಸೋಮವಾರ ನಡೆದ ದಸರಾ ಕಾರ್ಯಕಾರಿ ಸಮಿತಿಯ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ದಸರಾ ಸಿದ್ಧತೆಗಳ ಕುರಿತು ಮಾಹಿತಿ ಹಂಚಿಕೊಂಡರು.

ದಸರಾವನ್ನು ವ್ಯವಸ್ಥಿತವಾಗಿ ನಡೆಸಲು 17 ಉಪಸಮಿತಿಗಳನ್ನು ರಚಿಸಲಾಗಿದೆ. ಪ್ರತಿಯೊಂದು ಸಮಿತಿಗೆ ಕಾರ್ಯಾಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲಾಗುವುದು.

ಈ ಬಾರಿಯ ದಸರಾದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ‘ಕಂಬಳ’ವನ್ನು ಆಯೋಜಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ಕಂಬಳ ಆಯೋಜನೆ ಖಚಿತವಾದರೆ ಅದಕ್ಕಾಗಿ 18ನೇ ಉಪಸಮಿತಿಯನ್ನು ರಚಿಸಲಾಗುವುದು. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ‘ಸೈಕ್ಲಿಂಗ್ ವೆಲೋಡ್ರೋಮ್’ ಪ್ರದೇಶವನ್ನು ಕಂಬಳಕ್ಕಾಗಿ ಪರಿಶೀಲಿಸಲಾಗಿದ್ದು, ಮುಖ್ಯಮಂತ್ರಿಗಳ ಅಂತಿಮ ಸೂಚನೆಯ ನಂತರ ನಿರ್ಧಾರ ಹೊರಬೀಳಲಿದೆ.

ದಸರಾ ಉದ್ಘಾಟನೆಗೆ ಹಲವು ಗಣ್ಯರ ಹೆಸರುಗಳು ಶಾಸಕರಿಂದ ಬಂದಿವೆ. ಆದರೆ, ಅಂತಿಮವಾಗಿ ಯಾರನ್ನು ಆಹ್ವಾನಿಸಬೇಕು ಎಂಬುದನ್ನು ಮುಖ್ಯಮಂತ್ರಿಗಳೇ ತೀರ್ಮಾನಿಸಲಿದ್ದಾರೆ.

ಮೈಸೂರು ನಗರದಲ್ಲಿ ಪ್ರಸ್ತುತ ನಡೆಯುತ್ತಿರುವ ಫ್ಲೈಓವರ್, ವೈಟ್ ಟಾಪಿಂಗ್ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪೈಕಿ ದಸರಾಗೂ ಮುನ್ನ ಮುಗಿಯುವ ಕೆಲಸಗಳನ್ನು ತಕ್ಷಣ ಪೂರ್ಣಗೊಳಿಸಲು ಸೂಚಿಸಲಾಗಿದೆ. ದಸರಾ ವೇಳೆಗೆ ಮುಗಿಯದ ದೀರ್ಘಾವಧಿಯ ಕಾಮಗಾರಿಗಳನ್ನು ಹಬ್ಬದ ದಿನಗಳಲ್ಲಿ ನಿಲ್ಲಿಸಿ, ಸಾರ್ವಜನಿಕರ ಹಾಗೂ ಪ್ರವಾಸಿಗರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.

ಈ ಬಾರಿ ಡ್ರೋನ್ ಶೋ ಅನ್ನು ಮತ್ತಷ್ಟು ವಿನೂತನವಾಗಿ ಆಯೋಜಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಅನುಮತಿ ಸಿಕ್ಕರೆ ಏರ್ ಶೋ ಕೂಡ ನಡೆಸಲಾಗುವುದು.

ದಸರಾ ವೀಕ್ಷಣೆಯ ‘ಗೋಲ್ಡ್ ಪಾಸ್’ ಗೊಂದಲಗಳಿಗೆ ತೆರೆ ಎಳೆಯಲು, ಆಸನಗಳ ಸಂಖ್ಯೆಗೆ ತಕ್ಕಂತೆ ಮಾತ್ರ ಪಾಸ್‌ಗಳನ್ನು ಮುದ್ರಿಸಿ, ಹಣ ನೀಡಿ ಖರೀದಿಸುವ ಸಾರ್ವಜನಿಕರಿಗೆ ಮಾತ್ರ ನೀಡಲಾಗುವುದು. ವಿಐಪಿಗಳಿಗೆ ಉಚಿತ ಗೋಲ್ಡ್ ಪಾಸ್ ನೀಡದಿರಲು ನಿರ್ಧರಿಸಲಾಗಿದೆ.

ಅಧಿಕಾರಿಗಳು ದಸರಾ ಮತ್ತು ಎಸ್‌ಐಆರ್ ಕೆಲಸಗಳಲ್ಲಿ ನಿರತರಾಗಿದ್ದರೂ, ದಿನನಿತ್ಯದ ಸಾರ್ವಜನಿಕ ಕೆಲಸ-ಕಾರ್ಯಗಳಿಗೆ ಯಾವುದೇ ರೀತಿಯ ಭಂಗ ಬರಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.

ಕೋಟ್:
“ದಸರಾ ನಮ್ಮ ರಾಜ್ಯದ ಹೆಮ್ಮೆ. ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ನೀಡಿದ ನೈರ್ಮಲ್ಯ, ಮಹಿಳೆಯರ ಸುರಕ್ಷತೆ, ತಾಲೂಕು ಮಟ್ಟದ ಕ್ರೀಡೋತ್ಸವಗಳಂತಹ ಉತ್ತಮ ಸಲಹೆಗಳನ್ನು ಪರಿಗಣಿಸಿ ಈ ಬಾರಿಯ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು.”

— ಡಾ. ಯತೀಂದ್ರ ಸಿದ್ಧರಾಮಯ್ಯ, ನಗರಾಭಿವೃದ್ಧಿ ಸಚಿವರು.

*ಸಲಹೆಗಳು*
ನರಸಿಂಹರಾಜ ವಿಧಾನ ಸಭಾ ಕ್ಷೇತ್ರದ ಶಾಸಕ ತನ್ಚೀರ್ ಸೇಠ್ ಅವರು ಮಾತನಾಡಿ ಸರ್ವಜನಿಕರು ಪಾಲ್ಗೊಳ್ಳಲು ನಾಡ ಹಬ್ಬ ದಸರಾವನ್ನು ಆಚರಿಸಲಾಗುತ್ತದೆ. ದಸರಾ ಕಾರ್ಯಕ್ರಮ ಅರ್ಥಯುತವಾಗಿ ಮೂಡಿಬರಲು
ಸಮಿತಿಯನ್ನು ರಚಿಸಿ ಸಮಿತಿಯಲ್ಲಿ ಅಧಿಕಾರೇತರ ಸದಸ್ಯರ ಸಂಖ್ಯೆಯನ್ನು ನಿಗದಿ ಪಡಿಸಿ ನಿಯೋಜಿಸಬೇಕು. ದಸರಾ ಸಂದರ್ಭದಲ್ಲಿ ಹೆಚ್ಚಿನ ಪ್ರವಾಸಿಗರು ಆಗಮಿಸುವ ಹಿನ್ನಲೆಯಲ್ಲಿ ಹೋಟೆಲ್ ಗಳಲ್ಲಿ ಕೃತಕ ಬೇಡಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು.

ಮೈಸೂರು ನಗರಕ್ಕೆ 4 ಭಾಗದಲ್ಲಿ ಹೆಲ್ಪ್ ಡೆಸ್ಕ್ ತೆರೆದು , ಆಗಮಿಸುವ ಜನರಿಗೆ ನಿಖರ ಮಾಹಿತಿ ನೀಡಿ, ಲೈಟಿಂಗ್ ವೀಕ್ಷಣೆ ಮಾಡಲು ದರ ನಿಗದಿ ಮಾಡಿ ವಿಶೇಷ ಟಾಂಗಾ ವ್ಯವಸ್ಥೆ ಮಾಡಬೇಕು, ಗೋಲ್ಡ್ ಪಾಸ್ ಅವರಿಗೆ ಕಿರಿಕಿರಿಯಾಗದಂತೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಸಿದ್ಧತೆ ಈಗಿನಿಂದಲೇ ಪ್ರಾರಂಭ ವಾಗಬೇಕು ಎಂದು ಸಲಹೆ ನೀಡಿದರು.

ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾಧು ಅವರು ಮಾತನಾಡಿ ಬುಡಕಟ್ಟು ಜನರಿಗೆ ದಸರಾ ದೀಪಾಲಂಕಾರ, ಚಾಮುಂಡಿಬೆಟ್ಟ, ಪ್ಲವರ್ ಶೋ ವೀಕ್ಷಿಸಲು ಒಂದು ದಿನ ವಿಶೇಷ ಅವಕಾಶ ನೀಡಬೇಕು. ದಸರಾ ಸಂದರ್ಭದಲ್ಲಿ ಕಬಿನಿ ಉತ್ಸವ ಆಚರಿಸಬೇಕು ಎಂದು ಮನವಿ ಮಾಡಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮಾತನಾಡಿ ಈ ಬಾರಿ ಮಳೆಯ ಅಭಾವವಿದ್ದು, ವಿದ್ಯುತ್ ಖರೀದಿಸಬೇಕಿದ್ದು, ಡ್ರೋನ್ ಶೋಗೆ ಪ್ರಯೋಜಕತ್ವ ಒದಗಿಸಿಕೊಡಬೇಕು ಹಾಗೂ ದೀಪಾಲಂಕಾರ ಸಮಿತಿಗೆ ಹೆಚ್ಚಿನ ಅನುದಾನ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಶಾಸಕರಾದ ಕೆ ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಡಿ.ರವಿಶಂಕರ್, ಜಿ.ಡಿ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ. ವಿವೇಕನಂದ, ಸಿ.ಎನ್ ಮಂಜೇಗೌಡ, ಗ್ಯಾರಂಟಿ ಯೋಜನೆ ಉಪಾಧ್ಯಕ್ಷೆ ಡಾ: ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಆಯುಕ್ತ ಅನುಚೇತ್, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *