ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ 2 ಡೋಸ್ ಲಸಿಕೆ ಕಡ್ಡಾಯ

ಮೈಸೂರು:27 ಜೂನ್ 2022

ನಂದಿನಿ ಮೈಸೂರು

ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸುವವರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು ಅಥವಾ 72 ಗಂಟೆಗಳ ಮುಂಚಿನ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಬಸ್ ನಿಲ್ದಾಣ, ಪಾರ್ಕಿಂಗ್ ಸ್ಥಳ ಸೇರಿದಂತೆ ನಾನಾ ಕಡೆಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ವರದಿ ಪರಿಶೀಲಿಸಲಿದ್ದಾರೆ.
ಉಚಿತ ಬಸ್ ಸೇವೆ ಇದ್ದು, ಖಾಸಗಿ ವಾಹನಗಳಿಗೆ ನಿರ್ಬಂಧಿಸಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಎರಡು ವರ್ಷದ ಬಳಿಕ ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲ ಆಗದ ರೀತಿಯಲ್ಲಿ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕೈಗೊಳ್ಳಲಿದೆ. 

ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು ಸರ್ಕಾರಿ ಬಸ್ ಗಳಿಂದ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದರು.

ಲಲಿತ್ ಮಹಲ್ ಪಕ್ಕದಲ್ಲಿರುವ 18 ಎಕರೆ ಪ್ರದೇಶದಿಂದ ಬಸ್ ಗಳು ಸಂಚರಿಸಲಿವೆ. ಭಕ್ತರ ಅನುಕೂಲಕ್ಕಾಗಿ 50 ಬಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗುವುದು. ಮೈಸೂರು ನಗರದ ನಾನಾ ಭಾಗಗಳಿಂದ ಕೂಡ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.

ಬೆಳಗ್ಗೆ 5.30 ರಿಂದ ರಾತ್ರಿ 8.30ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಚಾಮುಂಡಿ ವರ್ದಂತಿ ದಿನದಂದು ಬೆಳಗ್ಗೆ 7 ಗಂಟೆಗೆ ಬಸ್ ಸೇವೆ ಆರಂಭವಾಗಲಿದೆ.
ಒಂದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಮಳೆ ಹಿನ್ನೆಲೆಯಲ್ಲಿ ಪೆಂಡಾಲ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ .
ಬೆಟ್ಟದ ಮೇಲ್ಭಾಗದಲ್ಲಿ ದಾನಿಗಳಿಂದ ಊಟದ ವ್ಯವಸ್ಥೆ ಇರಲಿದೆ. ಸ್ವಚ್ಛತೆ ಕಾಪಾಡಲು ಪೌರಕಾರ್ಮಿಕರನ್ನು ನಿಯೋಜಿಸುವಂತೆ ಸೂಚಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಬೆಟ್ಟದ ಸುತ್ತಮುತ್ತ ಸಿಸಿಟಿವಿ ಅಳವಡಿಸಲಾಗುವುದು. ಅಧಿಕಾರಿಗಳು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು
ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಆಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ ಜನ್ಮೋತ್ಸವದ ಪ್ರಯುಕ್ತ ಕೈಗೊಳ್ಳಬೇಕಾದ ಅಗತ್ಯ ವ್ಯವಸ್ಥೆಗಳ ಪೂರ್ವಸಿದ್ಧತಾ ಸಭೆಯಲ್ಲಿ ಸಚಿವರು ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕರುಗಳಾದ ರಾಮದಾಸ್, ನಾಗೇಂದ್ರ, ಜಿ‌.ಟಿ.ದೇವೇಗೌಡ, ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಸುನಂದಾ ಪಾಲನೇತ್ರಾ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ, ಡಿಸಿಪಿ ಪ್ರದೀಪ್ ಗುಂಟಿ,ಎಎಸ್ಪಿ ಶಿವಕುಮಾರ್, ಜಿಪಂ ಸಿಇಒ ಪೂರ್ಣಿಮಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *